Thursday 9 April 2015

ರಾಯರು ಬಂದರು ಮಾವನ ಮನೆಗೆ / Raayaru bandaru maavana manege

ರಾಯರು ಬಂದರು ಮಾವನ ಮನೆಗೆ
     ರಾತ್ರಿಯಾಗಿತ್ತು;
ಹುಣ್ಣಿಮೆ ಹರಸಿದ ಬಾನಿನ ನಡುವೆ
     ಚಂದಿರ ಬಂದಿತ್ತು. - ತುಂಬಿದ
     ಚಂದಿರ ಬಂದಿತ್ತು.

ಮಾವನ ಮನೆಯಲಿ ಮಲ್ಲಿಗೆ ಹೂಗಳ
     ಪರಿಮಳ ತುಂಬಿತ್ತು.
ಬಾಗಿಲ ಬಳಿ ಕಾಲಿಗೆ ಬಿಸಿ ನೀರಿನ
     ತಂಬಿಗೆ ಬಂದಿತ್ತು - ಒಳಗಡೆ
     ದೀಪದ ಬೆಳಕಿತ್ತು.

ಘಮಘಮಿಸುವ ಮೃಷ್ಟಾನ್ನದ ಭೋಜನ
     ರಾಯರ ಕಾದಿತ್ತು.
ಬೆಳ್ಳಿಯ ಬಟ್ಟಲ ಗಸಗಸೆ ಪಾಯಸ
     ರಾಯರ ಕರೆದಿತ್ತು - ಭೂಮಿಗೆ
     ಸ್ವರ್ಗವೆ ಇಳಿದಿತ್ತು.

ಚಪ್ಪರಗಾಲಿನ ಮಂಚದ ಮೇಗಡೆ
     ಮೆತ್ತನೆ ಹಾಸಿತ್ತು.
ಅಪ್ಪಟ ರೆಸಿಮೆ ದಿಂಬಿನ ಅಂಚಿಗೆ
     ಚಿತ್ರದ ಹೂವಿತ್ತು. - ಪದುಮಳು
     ಹಾಕಿದ ಹೂವಿತ್ತು.

ಚಿಗುರೆಲೆ ಬಣ್ಣದ ಅಡಕೆಯ ತಂದಳು
    ನಾದಿನಿ ನಗುನಗುತ;
ಬಿಸಿಬಿಸಿ ಹಾಲಿನ ಬಟ್ಟಲ ತಂದರು
    ಅಕ್ಕರೆಯಲಿ ಮಾವ - ಮಡದಿಯ
    ಸದ್ದೇ ಇರಲಿಲ್ಲ.

ಮಡದಿಯ ತಂಗಿಯ ಕರೆದಿಂತೆಂದರು;
    "ಅಕ್ಕನ ಕರೆಯಮ್ಮ"
ಮೆಲುದನಿಯಲಿ ನಾದಿನಿ ಇಂತೆಂದಳು;
    "ಪದುಮಳು ಒಳಗಿಲ್ಲ" - ನಕ್ಕಳು.
    ರಾಯರು ನಗಲಿಲ್ಲ.

ಏರುತ ಇಳಿಯುತ ಬಂದರು ರಾಯರು
    ದೂರದ ಊರಿಂದ.
ಕಣ್ಣನು ಕಡಿದರು ನಿದ್ದೆಯು ಬಾರದು
    ಪದುಮಳು ಒಳಗಿಲ್ಲ - ಪದುಮಳ
    ಬಳೆಗಳ ದನಿಯಿಲ್ಲ.

ಬೆಳಗಾಯಿತು; "ಸರಿ, ಹೊರಡುವೆ"ನೆಂದರು
    ರಾಯರು ಮುನಿಸಿನಲಿ.
ಒಳಮನೆಯಲಿ "ನೀರಾಯಿತು!" ಎಂದಳು
    ನಾದಿನಿ ರಾಗದಲಿ. "ಯಾರಿಗೆ?"
    ಎನ್ನಲು ಹರುಷದಲಿ.
ಪದುಮಳು ಬಂದಳು ಹೂವನು ಮುಡಿಯುತ
    ರಾಯರ ಕೋಣೆಯಲಿ.

                                                        - ಕೆ. ಎಸ್. ನರಸಿಂಹ ಸ್ವಾಮಿ

No comments:

Post a Comment