IMPORTANT NOTICE

New official website is launched for Karada Community. Please visit www.karadavishwa.com for more details.

Thursday, 9 April 2015

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು / Udayavagali namma cheluva kannada nadu

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
 ಬದುಕು ಬಾಳಿನ ನಿಧಿಯು ಸದಭಿಮಾನದ ಗೂಡು |
ರಾಜನ್ಯರಿಪು ಪರಶುರಾಮನಾಳಿದ ನಾಡು
 ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು
 ಓಜೆಯಿಂ ಮೆರೆದರಸುಗಳ ಸಾಹಸದ ಸೂಡು
 ತೇಜವನು ನಮಗೀವ ವೀರ ವೃಂದದ ನಾಡು |
ಲೆಕ್ಕಿಗಮಿತಾಕ್ಷರರು ಬೆಳೆದು ಮೆರೆದಿಹ ನಾಡು
 ಜಕ್ಕಣನ ಶಿಲ್ಪಕಲೆಯಚ್ಚರಿಯ ಕರುಗೋಡು
 ಚೊಕ್ಕ ಮತಗಳ ಸಾರಿದವರಿಗಿದು ನೆಲೆವೀಡು
 ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು ||
ಪಾವನೆಯರಾ ಕೃಷ್ಣ ಭೀಮೆಯರ ತಾಯ್ನಾಡು
 ಕಾವೇರಿ ಗೋದೆಯರು ಮೈದೊಳೆವ ನಲುನಾಡು
 ಆವಗಂ ಸ್ಫೂರ್ತಿಸುವ ಕಬ್ಬಿಗರ ನಡೆಮಾಡು
 ಕಾವ ಗದುಗಿನ ವೀರ ನಾರಾಯಣನ ಬೀಡು ||  
                                                           - ಹುಯಿಲುಗೋಳ ನಾರಾಯಣ ರಾವ್

ರಾಯರು ಬಂದರು ಮಾವನ ಮನೆಗೆ / Raayaru bandaru maavana manege

ರಾಯರು ಬಂದರು ಮಾವನ ಮನೆಗೆ
     ರಾತ್ರಿಯಾಗಿತ್ತು;
ಹುಣ್ಣಿಮೆ ಹರಸಿದ ಬಾನಿನ ನಡುವೆ
     ಚಂದಿರ ಬಂದಿತ್ತು. - ತುಂಬಿದ
     ಚಂದಿರ ಬಂದಿತ್ತು.

ಮಾವನ ಮನೆಯಲಿ ಮಲ್ಲಿಗೆ ಹೂಗಳ
     ಪರಿಮಳ ತುಂಬಿತ್ತು.
ಬಾಗಿಲ ಬಳಿ ಕಾಲಿಗೆ ಬಿಸಿ ನೀರಿನ
     ತಂಬಿಗೆ ಬಂದಿತ್ತು - ಒಳಗಡೆ
     ದೀಪದ ಬೆಳಕಿತ್ತು.

ಘಮಘಮಿಸುವ ಮೃಷ್ಟಾನ್ನದ ಭೋಜನ
     ರಾಯರ ಕಾದಿತ್ತು.
ಬೆಳ್ಳಿಯ ಬಟ್ಟಲ ಗಸಗಸೆ ಪಾಯಸ
     ರಾಯರ ಕರೆದಿತ್ತು - ಭೂಮಿಗೆ
     ಸ್ವರ್ಗವೆ ಇಳಿದಿತ್ತು.

ಚಪ್ಪರಗಾಲಿನ ಮಂಚದ ಮೇಗಡೆ
     ಮೆತ್ತನೆ ಹಾಸಿತ್ತು.
ಅಪ್ಪಟ ರೆಸಿಮೆ ದಿಂಬಿನ ಅಂಚಿಗೆ
     ಚಿತ್ರದ ಹೂವಿತ್ತು. - ಪದುಮಳು
     ಹಾಕಿದ ಹೂವಿತ್ತು.

ಚಿಗುರೆಲೆ ಬಣ್ಣದ ಅಡಕೆಯ ತಂದಳು
    ನಾದಿನಿ ನಗುನಗುತ;
ಬಿಸಿಬಿಸಿ ಹಾಲಿನ ಬಟ್ಟಲ ತಂದರು
    ಅಕ್ಕರೆಯಲಿ ಮಾವ - ಮಡದಿಯ
    ಸದ್ದೇ ಇರಲಿಲ್ಲ.

ಮಡದಿಯ ತಂಗಿಯ ಕರೆದಿಂತೆಂದರು;
    "ಅಕ್ಕನ ಕರೆಯಮ್ಮ"
ಮೆಲುದನಿಯಲಿ ನಾದಿನಿ ಇಂತೆಂದಳು;
    "ಪದುಮಳು ಒಳಗಿಲ್ಲ" - ನಕ್ಕಳು.
    ರಾಯರು ನಗಲಿಲ್ಲ.

ಏರುತ ಇಳಿಯುತ ಬಂದರು ರಾಯರು
    ದೂರದ ಊರಿಂದ.
ಕಣ್ಣನು ಕಡಿದರು ನಿದ್ದೆಯು ಬಾರದು
    ಪದುಮಳು ಒಳಗಿಲ್ಲ - ಪದುಮಳ
    ಬಳೆಗಳ ದನಿಯಿಲ್ಲ.

ಬೆಳಗಾಯಿತು; "ಸರಿ, ಹೊರಡುವೆ"ನೆಂದರು
    ರಾಯರು ಮುನಿಸಿನಲಿ.
ಒಳಮನೆಯಲಿ "ನೀರಾಯಿತು!" ಎಂದಳು
    ನಾದಿನಿ ರಾಗದಲಿ. "ಯಾರಿಗೆ?"
    ಎನ್ನಲು ಹರುಷದಲಿ.
ಪದುಮಳು ಬಂದಳು ಹೂವನು ಮುಡಿಯುತ
    ರಾಯರ ಕೋಣೆಯಲಿ.

                                                        - ಕೆ. ಎಸ್. ನರಸಿಂಹ ಸ್ವಾಮಿ

Wednesday, 8 April 2015

ನನ್ನವಳು ನನ್ನೆದೆಯ ಹೊನ್ನಾಡನಾಳುವಳು / Nannavalu nannedeya honnadanaaluvalu

ನನ್ನವಳು ನನ್ನೆದೆಯ ಹೊನ್ನಾಡನಾಳುವಳು
ಬೆಳಗುಗೆನ್ನೆಯ ಚೆನ್ನೆ ನನ್ನ ಮಡದಿ||ಪ||

ಹೊಳೆಯ ಸುಳಿಗಳಿಗಿಂತ ಆಳಗಣ್ಣಿನ ಚೆಲುವು
ಅವಳೊಮ್ಮೆ ಹೆರಳ ಕೆದರಿ ಕಪ್ಪುಗುರುಳನ್ನು
ಬೆನ್ನ ಮೇಲೆಲ್ಲ ಹರಡಿದರೆ…
ದೂರದಲಿ, ಗಿರಿಯ ಮೇಲೆ ಇಳಿದಂತೆ ಇರುಳ ಮಾಲೆ
ಇಳಿದಂತೆ ಇರುಳ ಮಾಲೆ.

ಕರೆದಾಗ ತೌರು ಮನೆ, ನೆನೆದಾಗ ನನ್ನ ಮನೆ
ಹಳ್ಳಿಯೆರಡರ ಮುದ್ದು ಬಳ್ಳಿ ಅವಳು
ಮುಚ್ಚು ಮರೆ ಇಲ್ಲದೆ ಅಚ್ಚ ಮಲ್ಲಿಗೆಯಂತೆ
ಅರಳುತಿಹುದು ಅವಳ ಬದುಕು
ಬಂಗಾರದೊಡವೆಗಳ ಬಯಸಿಲ್ಲ ಮನಸಿನಲಿ
ಬಂಗಾರದಂತ ಹುಡುಗಿ
ನನ್ನೊಡವೆ, ನನ್ನ ಬೆಡಗಿ.

ಹಸಿರು ಸೀರೆಯನುಟ್ಟು, ಕೆಂಪು ಬಳೆಗಳ ತೊಟ್ಟು
ತುಂಬು ದನಿಯಲಿ ಕರೆವಳೆನ್ನ ಚೆಲುವೆ
ಹಣೆಯನಾಳುವುದು ಅವಳ ಕುಂಕುಮದ ನಿಡುವಟ್ಟು
ಲಕ್ಷ್ಮಿ ಅವಳೆನ್ನ ಮನೆಗೆ
ನಮಗಿದುವೇ ಸೊಗಸು ಬದುಕಿನ ಬಣ್ಣಗಳಾ ಸಂತೆ
ನಮಗಿಲ್ಲ ನೂರು ಚಿಂತೆ,ನಾವು ಗಂಧರ್ವರಂತೆ
ನಾವು ಗಂಧರ್ವರಂತೆ.

                                                                          - ಕೆ. ಎಸ್. ನರಸಿಂಹ ಸ್ವಾಮಿ 

* ಕೆ.ಎಸ್.ನ ಅವರ ಇರುವಂತಿಗೆ ಕವನಸಂಕಲನದ ಒಂದು ಮಾರ್ದವತೆ ತುಂಬಿದ ಕವನ. 1968 ರಲ್ಲಿ ಬಂದ ಸರ್ವಮಂಗಳ ಚಿತ್ರಕ್ಕೆ ಬಳಕೆಯಾಗಿದೆ.

Monday, 6 April 2015

ಅಂಥಿಂಥ ಹೆಣ್ಣು ನೀನಲ್ಲ / Anthintha hennu neenalla

ಅಂಥಿಂಥ ಹೆಣ್ಣು ನೀನಲ್ಲ;
ನಿನ್ನಂಥ ಹೆಣ್ಣು ಇನ್ನಿಲ್ಲ.

ಹೆಡೆಹೆಡೆಯ ಸಾಲು ತುರುಬೆಲ್ಲ,
ಗುಡಿನಿಂದ ಹೂವು ಮೇಲೆಲ್ಲ,
ತೆರೆತೆರೆಯ ಹೊರಳು ಕುರುಳೆಲ್ಲ,
ಸುಳಿಮಿಂಚು ಕಣ್ಣ ಹೊರಳೆಲ್ಲ!

ಮಣಿಮಲೆ ಕೊರಳ ದನಿಯೆಲ್ಲ,
ಹೊಂಬಾಳೆ ಆಸೆ ಒಳಗೆಲ್ಲ.
ಒತ್ತಾಯವಿಲ್ಲ: ಒಲವೆಲ್ಲ!
ನಿನ್ನಂಥ ಹೆಣ್ಣು ಹಲವಿಲ್ಲ.

ಎದೆಮಟ್ಟ ನಿಂತ ಹೂ ಬಳ್ಳಿ;
ಎಷ್ಟೊಂದು ಹೂವು ಅದರಲ್ಲಿ!
ಉಸಿರುಸಿರು ಮೊಗ್ಗು ಹೂವೆಲ್ಲ;
ನೀ ಬಳ್ಳಿ ಬೆಳಕು ಬದುಕೆಲ್ಲ!

ನಡುಬೆಟ್ಟದಲ್ಲಿ ನಿನ್ನೂರು;
ಅಲ್ಲಿಹವು ನವಿಲು ಮುನ್ನೂರು.
ಮುನ್ನೂರು ನವಿಲು ಬಂದಂತೆ
ನೀ ಬಂದರೆನಗೆ; ಸಿರಿವಂತೆ.

ನಡುದಾರಿಯಲ್ಲಿ ನನ್ನೂರು;
ಕುಡಿಮಿಂಚಿನೂರು ಹೊನ್ನೂರು
ಮುನ್ನೂರು ಮೆಂಚು ಹೊಳೆದಂತೆ
ನೀ ಬಂದರೆನಗೆ, ಸಿರಿವಂತೆ.

ಬಲುದೂರ ದೂರ ನೀನಾಗಿ,
ಹೊಂಗನಸು ನಡುವೆ ದನಿತೂಗಿ,
ಕಾದಿರಲು ನಾನು ನಿನಗಾಗಿ
ನೀ ಬರುವೆ ಚೆಲುವೆ ಹೊಳೆಯಾಗಿ.

ಏನಂಥ ಚೆಲುವೆ ನೀನಲ್ಲ.
ನೀನಲ್ಲ? ಚೆಲುವೆ ಇನ್ನಿಲ್ಲ!
ಹಾಡಲ್ಲ, ನೀನು ಕನಸಲ್ಲ;
ನಿನ್ನಿಂದ ಹಾಡು ಕನಸೆಲ್ಲ.

                                                    - ಕೆ. ಎಸ್. ನರಸಿಂಹಸ್ವಾಮಿ